ಬೆಂಗಳೂರು, (ಜ.12): ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೋಂಕು ಹೆಚ್ಚಳವಾಗುತ್ತಿರುವುದರಿಂದ ಸರ್ಕಾರ ಹೊಸ ಟಫ್ ರೂಲ್ಸ್ ಜಾರಿಗೆ ತರಲು ಮುಂದಾಗಿದೆ.
ಪರಿಸ್ಥಿತಿ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು (ಮಂಗಳವಾರ) ಹಿರಿಯ ಅಧಿಕಾರಿಗಳೊಂದಿಗೆ ವರ್ಚುವಲ್ ಸಭೆ ನಡೆಯಿತು. ಕೊರೋನಾ ಸೋಂಕು ತಡೆಗೆ ಮತ್ತಷ್ಟು ಟಫ್ ರೂಲ್ಸ್ ಜಾರಿ ಮಾಡಲು ಸಭೆಯಲ್ಲಿ ತೀರ್ಮಾನಿಸಲಾಗಿದ್ದು, ಈ ಆದೇಶ ನಾಳೆಯಿಂದಲೇ (ಜ.12) ಜಾರಿಗೆ ಬರಲಿದೆ.
ಇನ್ನು ಈ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಸಭೆಯ ವಿವರಗಳನ್ನು ಮಾಧ್ಯಮಗಳಿಗೆ ನೀಡಿದ್ದು, ಅದು ಈ ಕೆಳಗಿನಂತಿದೆ.
ಕರ್ನಾಟಕದ ವಿವಿಧೆಡೆ ವಸತಿ ಶಾಲೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕೊವಿಡ್ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಈ ಶಾಲೆಗಳನ್ನು ಬಂದ್ ಮಾಡುವ ಅಧಿಕಾರವನ್ನು ಜಿಲ್ಲಾಧಿಕಾರಿಗಳಿಗೆ ನೀಡಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟಪಡಿಸಿದರು,
ವೈಕುಂಠ ಏಕಾದಶಿಯಂದು ಸಂಪ್ರದಾಯದಂತೆ ದೇಗುಲಗಳಲ್ಲಿ ಪೂಜೆಗೆ ಅವಕಾಶವಿದೆ. ಆದರೆ ಹೆಚ್ಚಿನ ಜನ ಸೇರಬಾರದು ಎಂಬ ನಿಯಮ ಜಾರಿಗೊಳಿಸಲಾಗಿದೆ. ಭವಿಷ್ಯದ ಅಗತ್ಯಗಳನ್ನು ಗಮನದಲ್ಲಿರಿಸಿಕೊಂಡು ಮಕ್ಕಳ ವಾರ್ಡ್, ಬೆಡ್ಗಳನ್ನು ಮೀಸಲಿಡಲು ತೀರ್ಮಾನ ತೆಗೆದುಕೊಳ್ಳಲಾಗಿದೆ. ಪ್ರತಿಭಟನೆಯಲ್ಲಿಯೂ ಹೆಚ್ಚು ಜನರು ಸೇರುವಂತಿಲ್ಲ ಎಂದು ಗೃಹ ಸಚಿವರು ವಿವರಿಸಿದರು.
ಮಾಸ್ಕ್ ಮತ್ತು ದೈಹಿಕ ಅಂತರ ಕಡ್ಡಾಯವಾಗಿ ಕಾಪಾಡಬೇಕು. ಮಕ್ಕಳಿಗೆ ಯಾವುದೇ ರೀತಿಯ ಔಷಧ ಕೊರತೆಯಾಗಬಾರದು. ಆಕ್ಸಿಜನ್, ಔಷಧವನ್ನು ಎಲ್ಲಾ ಆಸ್ಪತ್ರೆಗಳಲ್ಲಿ ಸಂಗ್ರಹಿಸಡಬೇಕು ಎಂದು ಸಭೆಯಲ್ಲಿ ಚರ್ಚೆಯಾಗಿದೆ ಎಂದು ತಿಳಿಸಿದರು.
ವೀಕೆಂಡ್ ಕರ್ಫ್ಯೂ ಮುಂದುವರಿಕೆ ಸೇರಿದಂತೆ ಇತರ ವಿಷಯಗಳ ಬಗ್ಗೆ ಜ.14ರಂದು ಪ್ರಧಾನಿ ಸಭೆ ಬಳಿಕ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.
ಮೇಕೆದಾಟು ಯೋಜನೆ ಜಾರಿಗಾಗಿ ಕಾಂಗ್ರೆಸ್ ಪಾದಯಾತ್ರೆ ನಡೆಸುತ್ತಿರುವ ಕುರಿತು ಪ್ರತಿಕ್ರಿಯಿಸಿದ ಅವರು, ನಿಯಮ ಉಲ್ಲಂಘನೆ ಬಗ್ಗೆ ಕಾನೂನು ರೀತಿ ಕ್ರಮ ತೆಗೆದುಕೊಳ್ಳಲಾಗುವುದು. ಪಾದಯಾತ್ರೆಯಲ್ಲಿ ಭಾಗಿಯಾದ ಬಹುತೇಕರಿಗೆ ಸೋಂಕು ಬಂದಿದೆ. ಸೋಂಕು ಬಂದಿದ್ದರೂ ಬಹಿರಂಗವಾಗಿ ಹೇಳಿಕೊಳ್ಳುತ್ತಿಲ್ಲ. ಮೇಕೆದಾಟು ವಿಚಾರವಾಗಿ ಸಿದ್ದರಾಮಯ್ಯ ದಾರಿ ತಪ್ಪಿಸುತ್ತಿದ್ದಾರೆ. ಮೇಕೆದಾಟು ಜಾರಿಗೆ ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ ಎಂದು ಹೇಳಿದರು.
ಗುರುವಾರ ಲಾಕ್ಡೌನ್ ಭವಿಷ್ಯ ನಿರ್ಧಾರ
ಹೌದು… ರಾಜ್ಯದಲ್ಲಿ ಕೋವಿಡ್ ಸೋಂಕು ಭಾರೀ ಏರಿಕೆಯಾಗುತ್ತಿದ್ದು, ಪಾಸಿಟಿವಿಟಿ ದರ, ಸಕ್ರಿಯ ಪ್ರಕರಣಗಳ ಸಂಖ್ಯೆ ಕೂಡ ತೀವ್ರ ಏರಿಕೆ ಕಾಣ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಲಾಕ್ಡೌನ್ ಅಥವಾ ಇನ್ನಷ್ಟು ಕಠಿಣ ನಿಯಮ ಜಾರಿಗೆ ತವರು ಅವಶ್ಯಕತೆ ಇದ್ದು, ಈ ಬಗ್ಗೆ ಇದೇ ಗುರುವಾರ ಪ್ರಧಾನಿ ನರೇಂದ್ರ ಮೋದಿ ಸಭೆ ಬಳಿಕ ತೀರ್ಮಾನ ಕೈಗೊಳ್ಳುವ ಸಾಧ್ಯತೆಗಳು ಹೆಚ್ಚಿವೆ.
ಇನ್ನು ಕಳೆದ 10 ದಿನಗಳಲ್ಲಿ ಸುಮಾರು 8 ಸಾವಿರ ಮಕ್ಕಳಿಗೆ ಸೋಂಕು ತಗುಲಿದ್ದು, ಇವೇ ಮೊದಲಾದ ಕಾರಣದಿಂದ ಮತ್ತಷ್ಟು ಕಠಿಣ ನಿರ್ಬಂಧ ಜಾರಿ ಮಾಡುವ ಸಾಧ್ಯತೆ ಇದೆ. ಮೊದಲ ಹಂತದಲ್ಲಿ ಚೈನ್ ಬ್ರೇಕ್ ಮಾಡಲು 10 ದಿನ ಲಾಕ್ ಡೌನ್ ಮಾಡುವ ಸಾಧ್ಯತೆ ಇದೆ. ಆದರೆ, ಯಾವುದೇ ಕಾರಣಕ್ಕೂ ಲಾಕ್ ಡೌನ್ ಜಾರಿ ಮಾಡಲ್ಲವೆಂದು ಸಚಿವ ಸುಧಾಕರ್ ಹೇಳಿದ್ದು, ಮತ್ತಷ್ಟು ಕಠಿಣ ನಿರ್ಬಂಧ ಜಾರಿ ಮಾಡುವ ಬಿಗಿ ಕ್ರಮ ಕೈಗೊಳ್ಳುವ ಸಾಧ್ಯತೆಗಳಿವೆ ಎನ್ನಲಾಗಿದೆ.
