ಗದಗ ( ಸತ್ಯ ದರ್ಶನ ) ಸೆ. 23: ಹಾಲುಣಿಸುವ ತಾಯಂದಿರು, ಒಂದು ವರ್ಷದೊಳಗಿನ ಮಕ್ಕಳು ಮತ್ತು ವಯಸ್ಕರು ಪ್ರಾಣಿಗಳು ಕಡಿದಾಗ ರೇಬಿಸ್ ವಿರುದ್ಧ ಲಸಿಕೆಯನ್ನು ಪ್ರತಿಯೊಬ್ಬರೂ ಹಾಕಿಸಿಕೊಳ್ಳೂವ ಕುರಿತು ಜಾಗೃತಿ ಮೂಡಿಸಬೇಕು. ಸಾಕು ಪ್ರಾಣಿಗಳಿಗೂ ಕೂಡ ತಪ್ಪದೇ ಪ್ರತಿ ವರ್ಷ ಲಸಿಕೆ ಹಾಕಿಸಲು ಕ್ರಮ ತೆಗೆದುಕೊಳ್ಳಬೇಕೆಂದು ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ತಿಳಿಸಿದರು. 
ಅವರು ಗುರುವಾರದಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆರೋಗ್ಯ ಇಲಾಖೆಯ ಸಾಂಕ್ರಾಮಿಕ ರೋಗಗಳ ಹಾಗೂ ರಾಷ್ಟ್ರೀಯ ರೇಬಿಸ್ ನಿಯಂತ್ರಣ ಕಾರ್ಯಕ್ರಮದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸೊಳ್ಳೆಗಳಿಂದ ಹರಡಬಹುದಾದ ರೋಗಗಳಾದ ಡೇಂಘಿ, ಮಲೇರಿಯಾ, ಚಿಕುನ್ಗುನ್ಯಾ ಹಾಗೂ ಮೆದುಳ ಜ್ವರದ ಪ್ರಕರಣಗಳನ್ನು ತಡೆಗಟ್ಟಲು ಗುಂಡಿಗಳಲ್ಲಿ ನೀರು ನಿಲ್ಲದಂತೆ ಕ್ರಮವಹಿಸಬೇಕು. ಜಿಲ್ಲೆಯ ಪ್ರೌಢಶಾಲೆಗಳಲ್ಲಿ ಸಾಂಕ್ರಾಮಿಕ ರೋಗಗಳ ಬಗ್ಗೆ ಜಾಗೃತಿ ಮೂಡಿಸಲು ಕ್ರಮ ಕೈಗೊಳ್ಳಬೇಕು. ಮಳೆ ಹೆಚ್ಚಾಗಿರುವುದರಿಂದ ಲೆಪ್ಟೋಸ್ಪೈರೋಸಿಸ್ ಪ್ರಕರಣಗಳು ಉಲ್ಬಣಗೊಳ್ಳುವ ಸಾಧ್ಯತೆ ಇರುವುದರಿಂದ ಮುಂಜಾಗ್ರತಾ ಕ್ರಮಗಳನ್ನು ವಹಿಸಬೇಕು.
ನಿಯಮಿತವಾಗಿ ಎಲ್ಲ ಕುಡಿಯುವ ನೀರಿನ ಮೂಲಗಳಿಂದ ನೀರನ್ನು ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸುವುದು ಹಾಗೂ ಕುಡಿಯಲು ಯೋಗ್ಯವಲ್ಲ ಎಂದು ಕಂಡುಬಂದಲ್ಲಿ ಕ್ಲೋರಿನೇಷನ್ಗೆ ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ನಿರ್ದೆಶನ ನೀಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಹಾಗೂ ಪ್ರಭಾರಿ ಜಿಲ್ಲಾ ಸಮೀಕ್ಷಣಾಧಿಕಾರಿ ಡಾ||ಜಗದೀಶ ನುಚ್ಚಿನ ಮಾತನಾಡಿ ನಾಯಿ, ಬೆಕ್ಕು ಅಥವಾ ಇನ್ನಿತರೆ ಪ್ರಾಣಿಗಳು ಕಚ್ಚಿದಾಗ ನಿರ್ಲಕ್ಷ್ಯ ವಹಿಸದೇ ತಕ್ಷಣವೇ ಸಾಬೂನಿನಿಂದ 15 ನಿಮಿಷಗಳವರೆಗೆ ನಲ್ಲಿ ನೀರಿನಲ್ಲಿ ಚೆನ್ನಾಗಿ ತೊಳೆದು ಹತ್ತಿರದ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳಬೇಕು. ಸಾಮಾನ್ಯವಾಗಿ ರೇಬಿಸ್ ಸೋಂಕು ಹೊಂದಿದ ಪ್ರಾಣಿಗಳಲ್ಲಿ ನಾಯಿಗಳಿಂದ 97%, ಬೆಕ್ಕುಗಳಿಂದ 2% ಹಾಗೂ ಇತರೇ ಪ್ರಾಣಿಗಳಿಂದ 1% ರೋಗ ಹರಡುವ ಸಾಧ್ಯತೆ ಇರುತ್ತದೆ. ಎಲ್ಲ ಆರೋಗ್ಯ ಕೇಂದ್ರಗಳಲ್ಲಿ ಔಷಧಿ ಲಭ್ಯವಿರುವಂತೆ ಕ್ರಮ ವಹಿಸಲಾಗಿದೆ ಎಂದರು.
ರೇಬಿಸ್ ಒಂದು ವೈರಾಣುವಿನಿಂದ ಹರಡುವ ಮಾರಕ ಕಾಯಿಲೆ ಇದರ ತಡೆಗಟ್ಟುವಿಕೆ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಈ ರೋಗವನ್ನು ಸೋಲಿಸುವಲ್ಲಿ ಪ್ರಗತಿಯನ್ನು ಸಾಧಿಸಲು ಈ ದಿನವನ್ನು “ವಿಶ್ವ ರೇಬಿಸ್ ದಿನ” ವೆಂದು ಆಚರಿಸಲಾಗುತ್ತಿದೆ. ರೇಬಿಸ್ ಲಸಿಕೆಯನ್ನು ಅಭಿವೃದ್ಧಿಪಡಿಸಿದ ಸೂಕ್ಷ್ಮ ಜೀವ ಶಾಸ್ತ್ರಜ್ಞ ಲೂಯಿಸ್ ಪಾಶ್ಚರ್ ಅವರ ಮರಣದ ವಾರ್ಷಿಕೋತ್ಸವವನ್ನು ವಿಶ್ವ ರೇಬಿಸ್ ದಿನಾಚರಣೆಯನ್ನಾಗಿ ಆಚರಿಸಲಾಗುತ್ತಿದೆ. ಪ್ರತಿ ವರ್ಷದಂತೆ ಈ ವರ್ಷದ ಘೋಷವಾಕ್ಯ “ Rabies: one Health zero deaths ”. ಈ ರೋಗವನ್ನು 100% ತಡೆಗಟ್ಟಬಹುದಾಗಿದೆ ಎಂದು ಸಭೆಯಲ್ಲಿ ವಿವರಿಸಿದರು.
ಸಭೆಯಲ್ಲಿ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀಮತಿ ಡಾ|| ಬಿ.ಸುಶೀಲಾ, ಜಿಲ್ಲಾ ಆರ್.ಸಿ.ಎಚ್. ಅಧಿಕಾರಿ ಡಾ.ಬಿ.ಎಂ.ಗೊಜನೂರ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಜಿ.ಎಸ್.ಪಲ್ಲೇದ, ಜಿಲ್ಲಾಕುಟುಂಬ ಕಲ್ಯಾಣಾಧಿಕಾರಿ ವೈ.ಕೆ. ಭಜಂತ್ರಿ, ಡಾ. ಅರುಂಧತಿ ಕೆ, ಜಿಲ್ಲಾ ಮಟ್ಟದ ಕಾರ್ಯಕ್ರಮ ಅನುಷ್ಟಾನಾಧಿಕಾರಿಗಳು, ತಾಲೂಕಾ ಆರೋಗ್ಯಾಧಿಕಾರಿಗಳು ಹಾಗೂ ಸಂಬಂಧಪಟ್ಟ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.
