ಗದಗ: ನವೆಂಬರ 2: ಯುವ ಮತದಾರರನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸುವದರ ಮೂಲಕ ಮತದಾನ ಪ್ರಕ್ರಿಯೆಯಲ್ಲಿ ಕಡ್ಡಾಯವಾಗಿ ಪಾಲ್ಗೊಳ್ಳುವಂತೆ ಜಾಗೃತಿ ಮೂಡಿಸಲು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರಾದ ಡಾ.ಸುಶೀಲಾ ಬಿ, ಸೂಚನೆ ನೀಡಿದರು.
ಗದಗ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಕಚೇರಿಯಲ್ಲಿ ಜರುಗಿದ ಸ್ವೀಪ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮುಂಬರುವ ವರ್ಷವು ಚುನಾವಣಾ ವರ್ಷವಾಗಿರುವದರಿಂದ ಅಧಿಕಾರಿಗಳು ಸ್ವೀಪ್ ಚಟುವಟಿಕೆಗಳಲ್ಲಿ ಪರಿಣಾಮಕಾರಿಯಾಗಿ ತೊಡಗಿಸಿಕೊಳ್ಳುವಂತೆ ತಿಳಿಸಿದರು. ಮತದಾರರ ಚೀಟಿಗೆ ಆಧಾರ ಸಂಖ್ಯೆ ಜೋಡಣೆ ಕಾರ್ಯವನ್ನು ತೀವ್ರ ಗತಿಯಲ್ಲಿ ಜರುಗಿಸುವದರ ಜೊತೆಗೆ ಹೊಸ ಮತದಾರರ ನೋಂದಣಿ ಕಾರ್ಯದಲ್ಲಿ ಪ್ರತಿಶತ ನೂರರಷ್ಟು ಪ್ರಗತಿ ಸಾಧಿಸಲು ಸೂಚಿಸಿದರು.
ಮತದಾರರ ಪಟ್ಟಿ ಸೇರ್ಪಡೆಗೆ ಸಂಬಂಧಿಸಿದಂತೆ ಕಾಲೇಜುಗಳಲ್ಲಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಿ 18 ವರ್ಷ ಪೂರ್ಣಗೊಂಡ ಪ್ರತಿಯೊಬ್ಬರು ಮತದಾರರ ಪಟ್ಟಿಗೆ ಸೇರ್ಪಡೆಯಾಗುವಂತೆ ನಿಗಾವಹಿಸಬೇಕು. ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಬಿ.ಎಲ್.ಓ. ಗಳು ತಮ್ಮ ವ್ಯಾಪ್ತಿಯಲ್ಲಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು. ಆಯಾ ಪ್ರದೇಶದ ಅಂಗನವಾಡಿ ಕಾರ್ಯಕರ್ತೆಯರಿಂದ ಮರಣ ಹೊಂದಿದ ವ್ಯಕ್ತಿಗಳ ಮಾಹಿತಿ ಪಡೆದು ಮೃತ ಮತದಾರರ ಹೆಸರನ್ನು ಮತದಾರರ ಪಟ್ಟಿಯಿಂದ ಕೈಬಿಡಲು ನಿಯಮಾನುಸಾರ ಕ್ರಮ ಕೈಗೊಳ್ಳಲು ತಿಳಿಸಿದರು.
ಮತದಾನದ ಮಹತ್ವದ ಕುರಿತು ಕಾಲೇಜು, ಗ್ರಾಮ ಪಂಚಾಯತ ಹಾಗೂ ತಾಲೂಕು ಮಟ್ಟದಲ್ಲಿ ವ್ಯಾಪಕ ಪ್ರಚಾರ ಕೈಗೊಂಡು ಪ್ರತಿಯೊಬ್ಬ ಅರ್ಹ ಮತದಾರರು ಮತದಾನ ಪ್ರಕ್ರಿಯೆಯಿಂದ ಹೊರಗುಳಿಯದಂತೆ ಕ್ರಮ ವಹಿಸಲು ತಿಳಿಸಿದರು. ಕಳೆದ ಬಾರಿ ಕಡಿಮೆ ಮತದಾನವಾಗಿರುವ ಕೇಂದ್ರಗಳನ್ನು ಗುರುತಿಸಿ ಅಂತಹ ಪ್ರದೇಶಗಳಲ್ಲಿ ಮತದಾನದ ಮಹತ್ವದ ಕುರಿತು ವ್ಯಾಪಕ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸುವ ಮೂಲಕ ಮತದಾನದ ಮಹತ್ವವನ್ನು ತಿಳಿಸಬೇಕು. ಜಿಲ್ಲೆಯ ಪ್ರಮುಖ ಸ್ಥಳಗಳಲ್ಲಿ ಮತದಾರರ ಪಟ್ಟಿ ಸೇರ್ಪಡೆ ಹಾಗೂ ಮತದಾನದ ಮಹತ್ವ ಸಾರುವ ಜಾಗೃತಿ ಫಲಕಗಳನ್ನು ಅಳವಡಿಸುವದರ ಜೊತೆಗೆ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚಿನ ಪ್ರಚಾರ ಕೈಗೊಳ್ಳುವಂತೆ ಸ್ವೀಪ್ ಸಮಿತಿ ಅಧ್ಯಕ್ಷರಾದ ಡಾ.ಸುಶೀಲಾ ಬಿ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ಹಾಗೂ ಸ್ವೀಪ್ ಸಮಿತಿ ನೋಡೆಲ್ ಅಧಿಕಾರಿ ಬಸವರಾಜ ಅಡವಿಮಠ, ಜಿ.ಪಂ. ಮುಖ್ಯ ಲೆಕ್ಕಾಧಿಕಾರಿ ಜೆ.ಸಿ.ಪ್ರಶಾಂತ ಸೇರಿದಂತೆ ಸಮಿತಿ ಸದಸ್ಯರು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.
