ಗದಗ .ಜ.೧೧: ದಲಿತ ವಿರೋಧಿ ರಾಜ್ಯ ಸರ್ಕಾರವನ್ನು ವಜಾಗೊಳಿಸಿ ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿಯನ್ನು ಅಂಗೀಕರಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡುವಂತೆ ಆಗ್ರಹಿಸಿ ನಗರದಲ್ಲಿ ಮಂಗಳವಾರ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಜಾರಿ ಹೋರಾಟ ಸಮಿತಿ ಪ್ರತಿಭಟನೆ ನಡೆಸಿತುಪರಿಶಿಷ್ಟ ಜಾತಿಯಲ್ಲಿ 101 ಜಾತಿಗಳಿವೆ.
ಪರಿಶಿಷ್ಟ ಜಾತಿಗಳಿಗೆ ಸೇರಿದ 36 ಮಂದಿ ಶಾಸಕರಿದ್ದು, ಮಾದಿಗ ಸಮುದಾಯದವರು ಕೇವಲ ಆರು ಮಂದಿ ಇದ್ದಾರೆ.
ಆಯೋಗದ ವರದಿಯನ್ನು ಸರಿಯಾಗಿ ಗ್ರಹಿಸದ ಪಶು ಸಂಗೋಪನಾ ಸಚಿವ ಪ್ರಭು ಚವಾಣ್ ಅವರು, ಲಂಬಾಣಿ, ಕೊರಮ, ಕೊರಚ ಮುಂತಾದ ಸಮುದಾಯಗಳನ್ನು ಎತ್ತಿಕಟ್ಟಿ, ಆಯೋಗದ ವರದಿಯನ್ನು ಜಾರಿ ಮಾಡಬಾರದು ಎಂದು ಹೇಳಿಕೆ ಕೊಡುತ್ತಾ ಸಮಾಜವನ್ನು ದಿಕ್ಕು ತಪ್ಪಿಸುತ್ತಿದ್ದಾರೆ. ಅವರನ್ನು ಸಂಪುಟದಿಂದ ವಜಾ ಗೊಳಿಸಬೇಕು’ ಎಂದು ಆಗ್ರಹಿಸಿದರು.
ಮೀಸಲಾತಿ ನೀಡುವಂತೆ ಆಗ್ರಹಿಸಿ ಬೆಂಗಳೂರಿನವರೆಗೆ ಪಾದಯಾತ್ರೆ ಮಾಡಲಾಗಿತ್ತು. ಆದರೂ ಸರ್ಕಾರ ಪರಿಶಿಷ್ಟರ ಮನವಿಯನ್ನು ಪುರಸ್ಕರಿಸದೇ ಸಾಮಾಜಿಕ ಚಳುವಳಿಗಾರರ ಮೇಲೆ ದೌರ್ಜನ್ಯ ನಡೆಸಿ ಲಾಠಿ ಪ್ರಹಾರ ನಡೆಸಿ ಬಂಧಿಸಿದೆ.
ಇದು ದಲಿತರ ಮೇಲೆ ನಡೆಸಿದ ದೌರ್ಜನ್ಯ. ಇಂತಹ ಪರಿಶಿಷ್ಟರ ನಿರ್ಲಕ್ಷ್ಯ, ನಿಷ್ಕೃಷ್ಟತೆ ಹೊಂದಿರುವ ಈ ಕೋಮುವಾದಿ ಸರ್ಕಾರವನ್ನು ರಾಜ್ಯಪಾಲರು ವಜಾ ಮಾಡುವಂತೆ ಆಗ್ರಹಿಸಿದರು.
ಇದಲ್ಲದೇ ರಾಜ್ಯಪಾಲರು ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿಯನ್ನು ಅಂಗೀಕರಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡುವ ಮೂಲಕ ಪರಿಶಿಷ್ಟರಿಗೆ ನ್ಯಾಯ ಒದಗಿಸಿಕೊಡಬೇಕೆಂದು ಆಗ್ರಹಿಸಿದರು.
